ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೇ ಪರಿಹಾರ ಘೋಷಣೆ ಮಾಡಿದ್ದು, ತಲಾ 10 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ 18 ಮಂದಿ ಸಾವಿಗೀಡಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಭಾರತೀಯ ರೈಲ್ವೇ ಇಲಾಖೆ ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರಯಾಣಿಕರ ರಕ್ಷಣೆಗೆ ಎಲ್ಲ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದೆ.
ಅಂತೆಯೇ ಭಾರತೀಯ ರೈಲ್ವೆ ಇಲಾಖೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.
ಘಟನೆ :- ದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಯಾಗ್ರಾಜ್ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ.
ಪ್ಲಾಟ್ಫಾರ್ಮ್ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್ರಾಜ್ಗೆ ಹೊರಡುವ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ. ಈ ಘಟನೆಯಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.