ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣದ ಚಿತ್ರಣವೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಭರ್ಜರಿ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರು ಮತ್ತು ನಾಯಕರಿಗೆ ಧನ್ಯವಾದ ಹೇಳಲು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಋಣ ತೀರಿಸುವ ಕಾರ್ಯಕ್ರಮ ಇದು. ನಿಮ್ಮೆಲ್ಲರ ಬೆಂಬಲಕ್ಕೆ ನಾವು ಧನ್ಯವಾದ ಹೇಳಲು ಬಯಸುತ್ತೇವೆ. ನಾಲ್ಕು ಶಾಸಕರನ್ನು ಆಯ್ಕೆ ಮಾಡುವ ಮೂಲಕ ಜಿಲ್ಲೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿದ್ದೀರಿ. ಇದೀಗ ಅಭಿವೃದ್ಧಿಯ ಮೂಲಕ ಚನ್ನಪಟ್ಟಣ ಮತ್ತು ಬೆಂಗಳೂರು ದಕ್ಷಿಣದ ಚಿತ್ರವನ್ನು ಬದಲಾಯಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕ್ಷೇತ್ರದ ಜನರು ಸೂಕ್ತ ಉತ್ತರ ನೀಡಿದ್ದಾರೆ ಎಂದು ಹೇಳಿದ ಶಿವಕುಮಾರ್, ನೀವು ಕೇವಲ ಚನ್ನಪಟ್ಟಣಕ್ಕೆ ಮಾತ್ರ ಉತ್ತರ ನೀಡಿಲ್ಲ, ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದೀರಿಯ. ಚನ್ನಪಟ್ಟಣದ ಜನರನ್ನು ಸುಮ್ಮನೆ ಕೂರಿಸಲು ಸಾಧ್ಯವಿಲ್ಲ ಎಂದು ನೀವು ತೋರಿಸಿದ್ದೀರಿ ಎಂದು ತಿಳಿಸಿದರು.
ಚುನಾವಣೆ ವೇಳೆ ಇಲ್ಲಿ ನಾನೇ ಅಭ್ಯರ್ಥಿ ಎಂದಿದ್ದೆ. ಈಗಲೂ ನಾನೇ ಅಭ್ಯರ್ಥಿ. ಮುಂದಿನ ಒಂದು ವಾರದಲ್ಲಿ ಮತ್ತೆ ಕ್ಷೇತ್ರಕ್ಕೆ ಬಂದು ಕೊಟ್ಟ ಮಾತು ಈಡೇರಿಸುವ ಕೆಲಸದ ಬಗ್ಗೆ ಪರಿಶೀಲಿಸುತ್ತೇನೆ. ಚುನಾವಣೆ ಸಮಯದಲ್ಲಿ ನಾನು ಕುಮಾರಸ್ವಾಮಿ ಅವರಿಗೆ ನೀವು ಶಾಸಕರಾಗಿ, ಮುಖ್ಯಮಂತ್ರಿಯಾಗಿ ಯಾವ ಸಾಧನೆ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದೆ. ಯೋಗೇಶ್ವರ್ ಅನೇಕ ದೇವಾಲಯ ಕಟ್ಟಿಸಿದ್ದಾರೆ, ನೀವು ಯಾವ ದೇವಾಲಯ ಕಟ್ಟಿದ್ದೀರಿ, ಶಾಲೆಗಾಗಿ ನೀವು 2 ಎಕರೆ ಜಮೀನು ದಾನ ಮಾಡಿದ್ದೀರಾ ಎಂದು ಸವಾಲು ಹಾಕಿದ್ದೆ. ನನ್ನ ಪ್ರಶ್ನೆಗೆ ಅವರಿಂದ ಉತ್ತರವೇ ಬರಲಿಲ್ಲ ಎಂದರು.